ವೇದಿಕೆಯ ಮೇಲೆ ಸಂಗೀತ ಮಾತ್ರಿಕರು ಸಂಗೀತ ಸಾಧನೆಯ ಪ್ರಶಸ್ತಿಯ ಗರಿಯನ್ನು ಮುಡಿಗೇರಿಸಿಕೊಳ್ಳುತ್ತಿದ್ದರೆ. ಸಭಿಕರಲ್ಲಿ ಸಂತಸ, ಸಂಭ್ರಮ, ಅಭಿಮಾನಿಗಳ ಮುಖದಲ್ಲಿ ತೃಪ್ತ ಭಾವ. ನಡು ನಡುವೆ ಕಣ್ಮನ ಸೆಳೆಯುವ ಹಾಡು-ನೃತ್ಯ ಪ್ರದರ್ಶನ.ನಗರದ ಅರಮನೆ ಮೈದಾನದಲ್ಲಿ ವರ್ಣರಂಜಿತ ಅದ್ದೂರಿ ವೇದಿಕೆಯಲ್ಲಿ ಶುಕ್ರವಾರ ನಡೆದ ಚಿತ್ತಾರ ಮ್ಯೂಸಿಕ್ ಅವಾರ್ಡ್-2025 ಪ್ರಶಸ್ತಿ ಪ್ರದಾನ ಸಮಾರಂಭದ ಸೊಬಗು ಹೀಗಿತ್ತು.
ಜೀವಮಾನದ ಪ್ರಶಸ್ತಿ ಪ್ರದಾನ, 30ಕ್ಕೂ ಹೆಚ್ಚು ವಿಭಾಗಗಳಲ್ಲಿ ಸಂಗೀತ ಸಾಧನೆಗೆ ಪ್ರಶಸ್ತಿ ಪ್ರದಾನ, ಸಾಹಿತ್ಯ, ಸಂಗೀತ, ರಾಜಕೀಯ, ಸಿನಿಮಾ ಸಹಿತ ವಿವಿಧ ರಂಗಗಳ ಪ್ರಮುಖರು, ಕಾರ್ಯಕ್ರಮದ ಪ್ರಶಸ್ತಿ ಪ್ರದಾನ ಮಾಡಿ ಎಲ್ಲರಿಗೂ ಹುರುಪು ತುಂಬಿದರು.
ರೆಡ್ ಕಾರ್ಪೆಟ್ ಮೇಲೆ ವೈಯ್ಯಾರದಿಂದ ಹೆಜ್ಜೆ ಹಾಕಿದ ತಾರೆಯರು, ವೇದಿಕೆಗೇರಿ ಪ್ರಶಸ್ತಿ ತಮ್ಮದಾಗಿಸಿಕೊಂಡ ಪ್ರತಿಭೆಗಳ ಭಾವುಕ ಮಾತುಗಳು. ಅನುರಾಗ್ ಹಾಗೂ ಅನುಪಮ ಗೌಡ ಅವರ ಚಂದದ ನಿರೂಪಣೆ ಸಮಾರಂಭದ ಮೆರಗು ಹೆಚ್ಚಿಸಿತು.
ವಿವಿಧ ವಿಭಾಗಗಳಲ್ಲಿ ಭವ್ಯ ಪರದೆಯಲ್ಲಿ ಪ್ರಶಸ್ತಿ ನಾಮನಿರ್ದೇಶಿತರ ಹೆಸರು ಬರುವಾಗ ಹಲವರಿಗೆ ಕುತೂಹಲ ಮತ್ತು ದುಗುಡ ಒಟ್ಟೋಟ್ಟಿಗೆ ಉಂಟಾಯಿತು. ವಿಜೇತರ ಹೆಸರು ಘೋಷಣೆ ಆಗುತ್ತಿದ್ದಂತೆ ವಿಜೇತರು ಸಂಭ್ರಮಿಸಿದರೆ, ಉಳಿದವರು ಕೈಕುಲುಕಿ ಅಭಿನಂದನೆ ಸಲ್ಲಿಸಿದರು.
ʻಚಿತ್ತಾರ Best Singer – Male-2025
ಯುವ ಗಾಯಕ ಜಸ್ಕರಣ್ ಸಿಂಗ್ ಪಾಲಿಗೆ ಕನ್ನಡ ಚಿತ್ರರಂಗ ಮತ್ತು ಕರ್ನಾಟಕ ಅದೃಷ್ಟದ ತಾಣವಾಗಿದೆ. ಕನ್ನಡ ರಿಯಾಲಿಟಿ ಶೋ ಮೂಲಕ ಮನೆಮಾತಾದ ಜಸ್ಕರಣ್ ಸಿಂಗ್ ಅವರ ಮನಮೋಹಕ ಗಾಯನಕ್ಕೆ ಮನಸೋಲದವರಿಲ್ಲ. ಕಿನ್ನಾಲ್ ರಾಜ್ ಸಾಹಿತ್ಯ ಮತ್ತು ನಿರ್ದೇಶನದ ‘ಸಿಂಹ ರೂಪಿಣಿ‘ ಚಿತ್ರಕ್ಕಾಗಿ ಜಸ್ಕರಣ್ ಹಾಡಿದ ‘ಬಂಗಾರದ ಗೊಂಬೆ‘ ಹಾಡು ಪ್ರೇಮಿಗಳ ಪಾಲಿಗೆ ಹಾಟ್ ಫೇವರಿಟ್. ಆಕಾಶ್ ಪರ್ವ ಸಂಗೀತ, ಜಸ್ಕರಣ್ ಸಿಂಗ್ ಗಾಯನ ಸೋಶಿಯಲ್ ಮೀಡಿಯಾದಲ್ಲಿ ಸಂಚಲನವನ್ನೇ ಸೃಷ್ಟಿಸಿತ್ತು. ಸುಮಧುರ ಕಂಠದ ಗಾಯಕ ಜಸ್ಕರಣ್ ಸಿಂಗ್ ಅವರಿಗೆ ‘ಬಂಗಾರದ ಗೊಂಬೆ‘ ಹಿನ್ನೆಲೆ ಗಾಯನಕ್ಕೆ ʻಚಿತ್ತಾರ Best Singer – Male-2025 ಪ್ರಶಸ್ತಿ ನೀಡಿ ಗೌರವಿಸಿದೆ.

